ಗುಂಡ್ಲುಪೇಟೆ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಬಿಎಲ್ಒಗಳೊಂದಿಗೆ ಕೈಜೋಡಿಸಿ ಯಾವುದೇ ಅರ್ಹ ಮತದಾರರ ಹೆಸರು ಕೈತಪ್ಪದಂತೆ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಎಸ್. ನಾರಾಯಣ್ ಕರೆ ನೀಡಿದರು.
ಪಟ್ಟಣದ ಹೂರವಲಯದ ಖಾಸಗಿ ಹೋಟೆಲ್ನಲ್ಲಿ ಗುರುವಾರ ನಡೆದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಬೇಗೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ ಹಾಗೂ ಎಸ್ಐಆರ್ ಕುರಿತು ಜನಜಾಗೃತಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳು ಕೈಬಿಡದಂತೆ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರನ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕೇಂದ್ರದಲ್ಲಿ ಬಿಜೆಪಿ ಎಸ್ ಐಆರ್ ಪ್ರಕ್ರಿಯೆ ಅಸ್ತ್ರ ಇಟ್ಟುಕೊಂಡು ಪಶ್ಚಿಮ ಬಂಗಾಳದಲ್ಲಿ 75 ಲಕ್ಷ ಮತಗಳನ್ನು ಡಿಲೀಟ್ ಮಾಡಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಸರ್ಕಾರ ಇದೆ ಅಲ್ಲಿ ಈ ತರ ಇದೆ. ಬಡವರು, ಕೂಲಿ ಕಾರ್ಮಿಕರು ಹೆಸರನ್ನು ಮತದಾನದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಇನ್ನೂ 20 ದಿನ ಬಾಕಿ ಇದೆ ಏನೇ ಕೆಲಸ ಇದ್ದರೂ ಬಿಎಲ್ ಓ ಜೊತೆ ಕೈ ಜೋಡಿಸಿ ಮತಗಳನ್ನ ಮರೆಯಾಗದಂತೆ ಎಚ್ಚರ ವಹಿಸಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಆಯೋದ್ಯೆಯ ರಾಮನ ಹೆಸರಿನಲ್ಲಿ ಭಕ್ತಾಧಿಗಳ ಹಾಗೂ ಸಾರ್ವಜನಿಕರ ಹಣ ಲೂಟಿ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರಿಯೆ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಪದಾಧಿಕಾರಿಗಳಿಗೆ ಸೂಚಿಸಿದರು. ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಸುಮಾರು 900 ಕೋಟಿ ರೂ. ಅನುದಾನ ತರಲಾಗಿದೆ. ಎಲ್ಲಾ ಸಮುದಾಯಗಳ ಬಡಾವಣೆಗಳಿಗೆ ರಸ್ತೆ, ಸಮುದಾಯ ಭವನ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಯೂ ಶೀಘ್ರ ಪೂರ್ಣಗೊಳ್ಳಲಿದ್ದು, ಮುಂದಿನ 20 ದಿನಗಳಲ್ಲಿ ಕಲ್ಲುಕಟ್ಟೆ ಕೆರೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಎಸ್ಇಪಿ ಹಾಗೂ ಟಿಎಸ್ಪಿ ಯೋಜನೆಗಳಡಿ ಹೆಚ್ಚಿನ ಅನುದಾನ ಕೋರಲಾಗಿದೆ. ಶಿಕ್ಷಣ ಕ್ಷೇತ್ರಕ್ಕೂ ವಿಶೇಷ ಉತ್ತೇಜನ ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಿಳಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಆದೇಶ ಪತ್ರ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುಸೂದನ್, ಮಾಜಿ ಕಾಡಾ ಅಧ್ಯಕ್ಷ ನಂಜಪ್ಪ, ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ. ರಾಜಶೇಖರ್, ಬೇಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಮಹೇಶ್, ಎಪಿಎಂಸಿ ಅಧ್ಯಕ್ಷ ನಾಗರಾಜು, ಶಿವನಾಗಪ್ಪ, ಹಾಪ್ ಕಾಮ್ಸ್ ಅಧ್ಯಕ್ಷ ನಾಗೇಶ್, ಕೃಷಿಕ ಸಮಾಜದ ಅಧ್ಯಕ್ಷ ದೇಪಾಪುರ ಸಿದ್ದಪ್ಪ, ಸೋಮಹಳ್ಳಿ ಶಿವನಾಗಪ್ಪ, ಅಣ್ಣಯ್ಯಸ್ವಾಮಿ, ಬಿ.ಜಿ. ಶಿವಕುಮಾರ್ ಗೋಪಾಲಪುರ ಲೋಕೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



