ಮಧುಗಿರಿ : ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೀಡಾಗದೇ ನಿರ್ಭೀತಿಯಿಂದ ಪರೀಕ್ಷೆ ಎದುರಿಸುವಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಕೆ.ಆರ್ ಬಡಾವಣೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುಮಾರು ೫೫ ಲಕ್ಷ ರೂ ಮೊತ್ತದ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆಗಳು ಆರಂಭಗೊಂಡಿದ್ದು ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಸಹ ಯಾವುದೇ ಗೊಂದಲಕ್ಕೀಡಾಗದೇ ಸಂಕೋಚವಿಲ್ಲದೆ ಗೊತ್ತಿರುವಂತಹ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಧೈರ್ಯವಾಗಿ ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ನೀಡಿದರು.
ಮುಂದಿನ ದಿನಗಳಲ್ಲಿ ಶಾಸಕ ಕೆ.ಎನ್ ರಾಜಣ್ಣ ನವರು ಈ ಶಾಲೆಯನ್ನು ಹೈಟೆಕ್ ಮಾದರಿ ಶಾಲೆಯಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಈ ಶಾಲೆಯ ಹೆಚ್ಚುವರಿ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದ್ದು, ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರಲ್ಲದೆ, ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಸಹ ಮಕ್ಕಳಿಗೆ ಅಗತ್ಯವಿರುವ ತರಬೇತಿಯನ್ನು ನೀಡುವುದರ ಮೂಲಕ ಈ ಬಾರಿ ನೆಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉತ್ತಮ ಫಲಿತಾಂಶ ತಂದುಕೊಡುವಂತಹ ಕೆಲಸವನ್ನು ಎಲ್ಲರೂ ಮಾಡುವಂತೆ ಮನವಿ ಮಾಡಿದರು.
ಮುಂದುವರೆದು, ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ ಅಸ್ತ್ರವಾಗಿದ್ದು ಯಾವುದೇ ದುಶ್ಚಟಗಳ ಕಡೆ ಗಮನಹರಿಸದೇ ವಿದ್ಯಾಭ್ಯಾಸದ ಕಡೆ ತಮ್ಮ ಹೆಚ್ಚಿನ ಗಮನ ಹರಿಸುವುದರ ಮೂಲಕ ಪ್ರತಿಯೊಬ್ಬರು ಉತ್ತಮ ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಮಟ್ಟದ ಪದವಿಗಳನ್ನು ಪಡೆಯುವಂತೆ ಸೂಚಿಸಿದರು.
ಈ ಸಂಧರ್ಭದಲ್ಲಿ ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಆಸನಗಳ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದ್ದು ಅದನ್ನು ಕಲ್ಪಿಸಿಕೊಡುವ ಭರವಸೆ ನೀಡಿದರು. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಿಕ್ಷಣ ಇಲಾಖೆಯ ಡಿಡಿಪಿಐ ಮಾಧವರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಸರ್ಕಾರಗಳಿಂದ ಕಲ್ಪಿಸಲಾಗಿದ್ದು ಹೆಚ್ಚಿನ ದಾಖಲಾತಿಗಳಾದಲ್ಲಿ ಶಿಕ್ಷಕರಿಗೂ ಸಹ ಉತ್ತಮವಾಗಿ ಬೋಧನೆ ಮಾಡಲು ಅನುಕೂಲವಾಗಲಿದೆ. ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಯ ಸವೋತೋಮುಖ ಬೆಳವಣಿಗೆಗೆ ಸಹಕರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ, ಪುರಸಭೆ ಮುಖ್ಯಾಧಿಕಾರಿ ಸುರೇಶ್, ತಾಲೂಕು ದಂಡಾಧಿಕಾರಿ ಶ್ರೀನಿವಾಸ್, ಪುರಸಭೆ ಮಾಜಿ ಅಧ್ಯಕ್ಷ ಲಾಲಪೇಟೆ ಮಂಜುನಾಥ್, ಎಂ.ಕೆ.ನಂಜುಂಡರಾಜು, ಪುರಸಭೆ ಮಾಜಿ ಸದಸ್ಯ ಶಂಕರ್ ನಾರಾಯಣ್, ಶ್ರೀಧರ್, ಪ್ರಥಮ ದರ್ಜೆ ಗುತ್ತಿಗೆದಾರ ವೆಂಕಟ್ ಕೃಷ್ಣಾರೆಡ್ಡಿ, ರಾಧಾ ಶಾಮ್, ಚಿನ್ನಪ್ಪ ರೆಡ್ಡಿ, ಮುಖ್ಯಶಿಕ್ಷರು, ಸಹಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.



