ರಾಯಚೂರು: ರಾಯಚೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 14ನೇ ಹಣಕಾಸಿನ ಆಯೋಗದ ಹೋಲಿಕೆಯಲ್ಲಿ 15ನೇ ಆಯೋಗದಿಂದ ರಾಜ್ಯಕ್ಕೆ ₹80,000 ಕೋಟಿ ಅನುದಾನ ಕಡಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಈ ಕುರಿತು ಯಾವುದೇ ಬಿಜೆಪಿ ಸಂಸದರು ಧ್ವನಿ ಎತ್ತಿಲ್ಲ. ಪ್ರಹ್ಲಾದ್ ಜೋಶಿ ಅವರು ಕೇಂದ್ರದ ಪ್ರಭಾವಿ ಸಚಿವರಾಗಿದ್ದರೂ, ರಾಜ್ಯದ ₹11,495 ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಸಹಾಯ ಮಾಡಿಲ್ಲ,” ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ ಬೇಕೆಂಬ ಮನವಿಯನ್ನು ಪ್ರಧಾನಿಗಳು ಹಾಗೂ ಹಣಕಾಸು ಸಚಿವರಿಗೆ ಸಲ್ಲಿಸಲಾಗಿದ್ದು, ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಪ್ರಸ್ತಾವನೆಯನ್ನೂ ಪರಿಶೀಲಿಸಲಾಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದರು.
ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಕುಸಿತವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, “ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶಿಸಲಾಗಿದೆ. ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಸರ್ಕಾರ ಬದ್ಧವಾಗಿದೆ,” ಎಂದರು.
ಅಕ್ರಮ ಗಣಿಗಾರಿಕೆ ವಿಚಾರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ವಿಶೇಷ ನ್ಯಾಯಾಲಯ ರಚನೆಯ ಕುರಿತು ಪತ್ರ ಬರೆದಿದ್ದು, “ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಸಂತೋಷ್ ಹೆಗಡೆ ವರದಿ ಮೇಲೆ ಕ್ರಮ ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ,” ಎಂದರು.
ಕಾಂಗ್ರೆಸ್ ಶಾಸಕ ರಾಜು ಕಾಗೆ ಅಭಿವೃದ್ಧಿ ಕೆಲಸಗಳಿಲ್ಲ ಎಂಬ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು, “ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನ ಅಗತ್ಯವಿರುವ ಕ್ಷೇತ್ರಗಳಿಗೆ ನೀಡಲಾಗುತ್ತದೆ,” ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವಸತಿ ಸಚಿವರ ರಾಜೀನಾಮೆ ಕುರಿತು ನೀಡಿರುವ ಹೇಳಿಕೆಯ ಬಗ್ಗೆ, “ಈ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ. ಶಾಸಕರಿಂದ ಭೇಟಿ ಇದೇ 25 ರಂದು ನಡೆಯಲಿದೆ,” ಎಂದು ಸಿಎಂ ಸ್ಪಷ್ಟಪಡಿಸಿದರು.