ವರದಿ :ಸ್ಟೀಫನ್ ಜೇಮ್ಸ್.
ಗೃಹಲಕ್ಷ್ಮಿ’ ಕೇವಲ ಚುನಾವಣಾಲಕ್ಷ್ಮಿ: ಬಿ.ವೈ.ವಿಜಯೇಂದ್ರ ಟೀಕೆ
ಚಿಕ್ಕೋಡಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆತಂದಿರುವ ಗೃಹಲಕ್ಷ್ಮಿ ಯೋಜನೆಯು ಕೇವಲ ಚುನಾವಣಾ ಲಕ್ಷ್ಮಿಯಾಗಿದೆ. ಚುನಾವಣಾ ಬಂದಾಗ ಮಾತ್ರ ಫಲಾನುವಿಗಳ ಖಾತೆಗೆ ಹಣ ಸಂದಾಯ ಮಾಡುವದನ್ನು ಸಾಕಷ್ಟು ಭಾರಿ ನೋಡಿದ್ದೇವೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಬಿ-ಜಿ ರಾಮ್ ಜಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸುಳ್ಳಿನ ಕಂತೆಯನ್ನೇ ಬಿಚ್ಚುತ್ತಿದೆ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಜನರಿಗೆ ಸಾಕಷ್ಟು ಉಪಯೋಗವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ವಿಬಿ– ಜಿ ರಾಮ್ ಜಿ ಯೋಜನೆ ಕುರಿತು ಜನರಲ್ಲಿ ಜಾಗೃತಿಯನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂದು ಕರೆ ನೀಡಿದರು.’ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು ಬಿಜೆಪಿ ಬಾವುಟವನ್ನು ಬಿಜೆಪಿ ಕಾರ್ಯಕರ್ತರು ಹಾರಿಸಬೇಕು.
ರಾಜ್ಯವನ್ನು ನಾವೆಲ್ಲರೂ ಸುಭಿಕ್ಷೆಯತ್ತ ಕೊಂಡೊಯ್ಯಲು ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು’ ಎಂದು ಹೇಳಿದರು.ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಹಾತ್ಮ ಗಾಂಧಿ ಹೆಸರನ್ನು ಹೇಳಿಕೊಂಡು ಅಧಿಕಾರ ಮಾಡುತ್ತಾ, ಅವರ ತತ್ವಗಳನ್ನು ಪರಿಪಾಲನೆ ಮಾಡುವುದನ್ನು ಮರೆತಿದೆ. ಸುಖಾ ಸುಮ್ಮನೆ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದೆ’ ಎಂದರು.
ಬಿಡಿಸಿಸಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಹುಕ್ಕೇರಿ ಶಾಸಕ ನಿಖಿಲ ಕತ್ತಿ, ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ, ಶ್ರೀಮಂತ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ವಿವೇಕರಾವ್ ಪಾಟೀಲ, ಅಮೃತ ಕುಲಕರ್ಣಿ, ಬಸವರಾಜ ಹುಂದ್ರಿ, ಬಾಳಾಸಾಹೇಬ ವಡ್ಡರ ಇತರರು ಇದ್ದರು.



