ಬೆಳಗಾವಿ : ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ದ್ವೇಷ ಭಾಷಣ ನಿಷೇಧ ಕಾಯ್ದೆ ಜಾರಿ ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಗ್ಯಾರಂಟಿ ಯೋಜನೆ ಬಗ್ಗೆ ಕೇಳಿದಾಗ, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ. ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ ಎಂದರು.
ಅದಲ್ಲದೇ ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದರು.
ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಈ ವೇಳೆ ಪ್ರಶ್ನಿಸಿದ್ದಾರೆ.



