ಮಂಗಳೂರು (ದಕ್ಷಿಣ ಕನ್ನಡ): ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿತ ಸಂಭವಿಸಿ, ಮನೆಯ ಅವಶೇಷಗಳಡಿ ಸಿಲುಕಿರುವ ಸೀತಾರಾಮರ ಪತ್ನಿ ಅಶ್ವಿನಿ ಹಾಗೂ ಅವರ 3 ಮತ್ತು 2 ವರ್ಷದ ಪುಟಾಣಿ ಮಕ್ಕಳ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ.
ನಿರಂತರ ಮಳೆ ಹಾಗೂ ಗುಡ್ಡ ಮತ್ತಷ್ಟು ಕುಸಿಯುವ ಭೀತಿಯಿಂದ ಕಾರ್ಯಾಚರಣೆಗೆ ತಾಂತ್ರಿಕ ತೊಂದರೆ ಉಂಟಾಗಿದೆ. ಕಾಂತಪ್ಪ ಪೂಜಾರಿಯವರ ಮನೆ ಇರುವ ಪ್ರದೇಶಕ್ಕೆ ರಕ್ಷಣಾ ವಾಹನಗಳು ಪ್ರವೇಶಿಸಲು ಸಾಧ್ಯವಾಗಿಲ್ಲ. ಘಟನಾ ಸ್ಥಳಕ್ಕೆ ವೈದ್ಯರ ತಂಡ ಆಗಮಿಸಿ, ಅವಶೇಷಗಳಡಿಯಲ್ಲಿ ಸಿಲುಕಿರುವ ತಾಯಿ ಮತ್ತು ಮಕ್ಕಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.
ಘಟನೆಯಲ್ಲಿ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ (58) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ ಹಾಗೂ ಪುತ್ರ ಸೀತಾರಾಮರನ್ನು ರಕ್ಷಿಸಲಾಗಿದ್ದು, ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.