Wednesday, May 21, 2025
Google search engine

Homeರಾಜ್ಯಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ: 3 ಕೋಟಿ ರೂ. ಕಾಣಿಕೆ ಸಂಗ್ರಹ

ಮಾದಪ್ಪನ ಬೆಟ್ಟದಲ್ಲಿ ಹುಂಡಿ ಎಣಿಕೆ: 3 ಕೋಟಿ ರೂ. ಕಾಣಿಕೆ ಸಂಗ್ರಹ

ಚಾಮರಾಜನಗರ: ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. 34 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 3.04 ಕೋಟಿ ರೂ. ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್​​ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ, ಸೋಮವಾರ ಬೆಳಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.

ಎಣಿಕೆ ಕಾರ್ಯವು ರಾತ್ರಿ 11.30ಕ್ಕೆ ಮುಕ್ತಾಯವಾಗಿದೆ. ಈ ಬಾರಿ ಯುಗಾದಿ ಜಾತ್ರಾ ಮಹೋತ್ಸವ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 3,04,57,246 ರೂ. ಸಂಗ್ರಹವಾಗಿದೆ. ಚಿನ್ನ 115 ಗ್ರಾಂ ಮತ್ತು ಬೆಳ್ಳಿ 2 ಕೆಜಿ 964 ಗ್ರಾಂ ಸಂಗ್ರಹವಾಗಿದೆ. ಇದಲ್ಲದೇ ಸಿಂಗಾಪುರ, ಅಮೆರಿಕದ 27 ವಿದೇಶಿ ನೋಟುಗಳು, ಚಲಾವಣೆಯಲ್ಲಿಲ್ಲದ 2,000 ಮುಖಬೆಲೆಯ 22 ನೋಟುಗಳು ಪತ್ತೆಯಾಗಿವೆ.

ಇ-ಹುಂಡಿಯಲ್ಲಿ 3,53,441 ಕೂಡ ಸಂಗ್ರಹವಾಗಿದೆ ಎಂದು ಶ್ರೀಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular