ಮೈಸೂರು : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಪ್ಯ ಗ್ರಾಮದಲ್ಲಿ ಹಮ್ನಿಕೊಳ್ಳಲಾಗಿದ್ದ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೂ 323.04ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮೂರು ಬಾರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
2024 ರಲ್ಲಿ 501 ಕೋಟಿ ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, 2025 ರಲ್ಲಿ 1108 ಕೋಟಿ ರೂ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಇಂದು 323 ಕೋಟಿ ಸೇರಿದಂತೆ ಒಟ್ಟು 1932 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ವರುಣಾ ವಿಧಾನಸಭಾ ಕ್ಷೇತ್ರ ಒಂದರಲ್ಲೇ ಹಮ್ಮಿಕೊಳ್ಳಲಾಗಿದೆ ಎಂದರು.
ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 115000 ಕೋಟಿ ರೂ ವೆಚ್ಚ ಮಾಡಲಾಗಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸಹ ಒತ್ತು ನೀಡಲಾಗುತ್ತಿದೆ. ಮೈಸೂರು ಜಿಲ್ಲೆ ಒಂದರಲ್ಲೇ 10 ಸಾವಿರ ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ ಎಂದರು.
ನಂತರ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ದಲ್ಲಿ ನೀಮಾನ್ಸ್ ಆಸ್ಪತ್ರೆ ಮಾದರಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಯಲ್ಲಿ ಜಯದೇವ್ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಪ್ರಾರಂಭಿಸಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ಪಡೆಯುವ ರೀತಿ ಮಾಡಿದ್ದಾರೆ ಎಂದರು.
ಬಳಿಕ ವಿಧಾನ ಪರಿಷತ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ಕಳೆದ ಸಾಲು ಹಾಗೂ ಸದರಿ ಸಾಲಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷ ನೂರಾರು ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿರುವುದು ಸರ್ಕಾರದಿಂದ ಜನಪರ ಕೆಲಸಗಳಿಗೆ ಸಾಕ್ಷಿ ಎಂದರು. ಹಾಗೂ ಸಂವಿಧಾನದ ಮೌಲ್ಯವನ್ನು ಪ್ರತಿಯೊಬ್ಬರು ತಿಳಿಯಬೇಕು. ಸಂವಿಧಾನವನ್ನು ಗೌರವಿಸಿ ಪಾಲನೆ ಮಾಡುವ ಜನಪ್ರತಿನಿಧಿಗಳನ್ನು ಸಾರ್ವಜನಿಕರು ಬೆಂಬಲಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.
ಸಂಸದ ಸುನೀಲ್ ಬೋಸ್ ಅವರು ಮಾತನಾಡಿ ಸಂಗೊಳ್ಳಿ ರಾಯಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು ಬಾಬೂ ಜಗ ಜೀವನ್ ರಾಮ್ ಅವರು ಕಾರ್ಮಿಕರ ಅಭಿವೃದ್ಧಿಗಾಗಿ ಕಾರ್ಮಿಕ ವಿಮೆ ತಂದರು. ಸಮಾಜದಲ್ಲಿ ಹಿಂದುಳಿದ ವರ್ಗದವರ ಅಭಿವೃದ್ಧಿಗೆ ದುಡಿದವರು. ಇಂತಹ ಮಹಾನ್ ಚೇತನಗಳ ಪುತ್ಥಳಿಯನ್ನು ಅನಾವರಣಗೊಳಿಸಿರುವುದು ಸಂತೋಷದ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉನ್ನತ ಶಿಕ್ಷಣ ಸಚಿವ ಡಿ.ಸುಧಾಕರ್, ರಾಜ್ಯ ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್.ಎಂ.ರೇವಣ್ಣ, ವಿಧಾನ ಪರಿಷತ್ ಶಾಸಕ ಡಿ.ತಿಮ್ಮಯ್ಯ, ಕೆ.ಆರ್.ನಗರ ಶಾಸಕ ರವಿಶಂಕರ್, ಮೈಸೂರು ಪೇಂಟ್ಸ ಅಂಡ್ ವಾರ್ನಿಷ್ ಅಧ್ಯಕ್ಷ ಗಣೇಶ್ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.



