ಮಂಡ್ಯ: ಕೆ.ಆರ್ ಪೇಟೆಯಲ್ಲಿ ಅಕ್ರಮವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿದ್ದ ಜಾಲವೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 31ಕ್ಕೂ ಹೆಚ್ಚು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿದ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣದಲ್ಲಿ ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್ನ ದಿವ್ಯ ಚೇತನ್, ನಾವಿ ಡಯಾಗ್ನಾಸ್ಟಿಕ್ ಸೆಂಟರ್ನ ಹರ್ಷಿತ್, ಮತ್ತು ಕುಶಲ್ ಡಯಾಗ್ನಾಸ್ಟಿಕ್ ಸೆಂಟರ್ನ ಹರೀಶ್ ಎಂಬುವವರನ್ನು ಬಂಧಿಸಲಾಗಿದೆ. ಮತ್ತೊಬ್ಬಬ್ಬ ಆರೋಪಿ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಅಪ್ರಾಪ್ತ ಹೆಣ್ಣುಮಕ್ಕಳು ಗರ್ಭಿಣಿಯರಾಗಿ ಬಂದಾಗ ನಿಯಮದಂತೆ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು. ಆದರೆ ವೈದ್ಯರು ಹಣದ ಆಸೆಗಾಗಿ ಈ ವಿಷಯವನ್ನು ಮುಚ್ಚಿಟ್ಟಿದ್ದರು. ಉಪಲೋಕಾಯುಕ್ತರ ಆದೇಶದಂತೆ ಮಂಡ್ಯ, ಮೈಸೂರು ಮತ್ತು ರಾಮನಗರದ ಲೋಕಾಯುಕ್ತ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ.
ತನಿಖೆಯ ವೇಳೆ ‘ಕುಶಲ್ ಡಯಾಗ್ನಾಸ್ಟಿಕ್ ಸೆಂಟರ್’ನಲ್ಲಿ ಸಾವಿರಾರು ಸ್ಕ್ಯಾನಿಂಗ್ ವರದಿಗಳ ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ಅಳಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಕೆ.ಆರ್. ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿದ್ದು, ಸರ್ಕಾರಿ ವೈದ್ಯರು, ಆಶಾ ಕಾರ್ಯಕರ್ತೆಯರು ಮತ್ತು ಖಾಸಗಿ ವ್ಯಕ್ತಿಗಳೂ ಸೇರಿದಂತೆ ಹಲವರ ವಿರುದ್ಧ ತನಿಖೆ ಮುಂದುವರಿದಿದೆ.



