ವರದಿ : ಎಡತೊರೆ ಮಹೇಶ್
ಎಚ್ ಡಿ ಕೋಟೆ : ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ವಿವಿಧ ವೃಂದದ ನೌಕರರ ಸಂಘದ ವತಿಯಿಂದ ದಿನಾಂಕ:11.03.2026 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ:07.03.2026 ರಂದು ಮೈಸೂರು ಜಿಲ್ಲಾ ಶಾಖೆಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ವಿವಿಧ ವೃಂದಗಳ ಸಂಘಗಳ ಪದಾಧಿಕಾರಿಗಳು ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರಾದ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಹಾಗೂ ಡಾ|| ಮಹದೇವಪ್ಪ ಹೆಚ್.ಸಿ ಮಾನ್ಯ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ ರವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ವಿವಿಧ ವೃಂದದ ನೌಕರರ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಯಿತು.
ಸನ್ಮಾನ್ಯ ಮುಖ್ಯಮಂತ್ರಿಗಳು ಮನವಿ ಪತ್ರವನ್ನು ಸ್ವೀಕರಿಸಿ, ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾನೂನು ಮಿತಿಯೊಳಗೆ ಬೇಡಿಕೆಗಳನ್ನು ಪರಿಶೀಲಿಸಿ ಈಡೇರಿಸುವ ಸಂಬಂಧ ಮಾನ್ಯ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಮಹದೇವಪ್ಪ ಹೆಚ್.ಸಿ ರವರ ಮಧ್ಯಸ್ಥಿಕೆಯಲ್ಲಿ ಮಾತುಕತೆಯ ಮೂಲಕ ಬಗೆ ಹರಿಸುವಂತೆ ಸೂಚಿಸಿ, ಸದರಿ ಮುಷ್ಕರವನ್ನು ಹಿಂಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಮೈಸೂರು ಶಾಖೆಯ ಗೌರವಾಧ್ಯಕ್ಷರಾದ ಡಾ. ಕುಮಾರಸ್ವಾಮಿ ಪಿ.ಸಿ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಉಪಾಧ್ಯಕ್ಷರಾದ ಡಾ. ರಮ್ಯ, ವೈದ್ಯಾಧಿಕಾರಿಗಳಾದ ಡಾ. ಶರತ್ ಹೆಚ್.ಎಸ್ ಹಾಗೂ ಆಲ್ ಕೆಡರ್.ನ ಅಧ್ಯಕ್ಷರಾದ ಶ್ರೀ ಹೆಚ್.ಎನ್ ಉಮೇಶ್ ಬಾಬು, ಕೆ.ಎಸ್.ಜಿ.ಇ ಸರಗೂರು ತಾಲ್ಲೂಕು ಅಧ್ಯಕ್ಷರಾದ ಶ್ರೀ ಸೋಮಶೇಖರ್, ಹಾಗೂ ಆರೋಗ್ಯ ಇಲಾಖೆಯ ವಿವಿಧ ವೃಂದದ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



