ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಗೆ ಹತ್ತಿರ ಬಂದಿದ್ದು, ಜಾತ್ಯಾತೀತ ಜನತಾ ಪಕ್ಷ (ಜೆಡಿಎಸ್) ತನ್ನ ರಣತಂತ್ರವನ್ನು ರೂಪಿಸುತ್ತಿದೆ.
ಈಗಾಗಲೇ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಆರಂಭಿಸಿರುವ ಜೆಡಿಎಸ್, ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಲ್ಲಿನ ಒಟ್ಟು 369 ವಾರ್ಡ್ಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದು, ನಗರದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ಕುರಿತು ಘೋಷಣೆ ಮಾಡಲಾಗಿದೆ.
ಈ ಕುರಿತು ನಗರದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಪಕ್ಷದ ನಾಯಕ ರಮೇಶ್ ಗೌಡ ಅವರು, ಜಿಬಿಎ ವ್ಯಾಪ್ತಿಯ ಎಲ್ಲಾ 369 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದರಲ್ಲದೆ, ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ಅನುಮೋದನೆಯ ಬಳಿಕ ಪ್ರಕಟಿಸಲಾಗುತ್ತದೆ ಎಂದರು.
ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರ ಅನುಮೋದನೆಯ ನಂತರ ಪ್ರಕಟಿಸಲಾಗುತ್ತದೆ. ಪಕ್ಷದ ನಿರ್ದೇಶನದಂತೆ ಶೀಘ್ರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಬೇಕು ಎಂದು ತಿಳಿಸಿದರು.
ಅಭ್ಯರ್ಥಿಗಳ ಸಂಘಟನೆ ಬಲ, ಜನಾಧಾರ ಮತ್ತು ಗೆಲುವಿನ ಸಾಧ್ಯತೆಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ, ಬೆಂಗಳೂರಿನಲ್ಲಿ ಶೀಘ್ರದಲ್ಲೇ ಬೃಹತ್ ಸಮಾವೇಶವನ್ನು ಆಯೋಜಿಸುವ ಯೋಜನೆಯೂ ಇದೆ. ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಾಯಕರು ಕರೆ ನೀಡಿದರು.



