ಕೆ.ಆರ್.ನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಲು ಜೆಡಿಎಸ್ ಪಕ್ಷದಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದು ಪಕ್ಷದ ವರಿಷ್ಠರ ಸೂಚನೆಯಂತೆ ಈಗಾಗಲೇ ಸಿದ್ಧತೆ ಕೈಗೊಂಡಿದ್ದೇನೆ ಎಂದು ಅರಣ್ಯ ಮತ್ತು ವಸತಿ ವಿಹಾರ ದಾಮಗಳ ನಿಗಮದ ಮಾಜಿ ಅಧ್ಯಕ್ಷ ಕೆ. ವಿವೇಕಾನಂದ ಹೇಳಿದರು.
ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳು ಮತ್ತು ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ ಮತದಾರರ ಬೆಂಬಲ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಕ್ಷೇತ್ರದ ವ್ಯಾಪ್ತಿಯ ೨೦ಸಾವಿರ ಶಿಕ್ಷಕ ಬಾಂಧವರನ್ನು ಖುದ್ದಾಗಿ ಮಾತನಾಡಿಸಿ ಸಹಕಾರ ಕೋರಿದ್ದೇನೆ ಎಂದರು. ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮತದಾರ ಶಿಕ್ಷಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದು ಇದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಹೆಚ್ಚಿನ ಬಲ ತಂದಿದೆ ಎಂದು ತಿಳಿಸಿದರು.
ಇದರ ಜೊತೆಗೆ ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನ ಮಂತ್ರಿ ಎಚ್. ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲು ಅವಕಾಶ ಕೇಳಿದಾಗ ಅವರುಗಳು ಹಸಿರು ನಿಶಾನೆ ತೋರಿಸಿದ್ದು ಅವರ ಆದೇಶದಂತೆ ಕಾರ್ಯೋನ್ಮುಖನಾಗಿದ್ದೇನೆಂದು ಮಾಹಿತಿ ನೀಡಿದರು.
ಮಾಜಿ ಸಚಿವರಾದ ಸಾ.ರಾ. ಮಹೇಶ್, ಜಿ. ಟಿ. ದೇವೇಗೌಡ, ಸಿ.ಎಸ್. ಪುಟ್ಟರಾಜು ಮತ್ತು ಕ್ಷೇತ್ರದ ವ್ಯಾಪ್ತಿಯ ಜೆಡಿಎಸ್ ಶಾಸಕರು ಮಾಜಿ ಶಾಸಕರು ಮತ್ತು ಪಕ್ಷದ ಮುಖಂಡರನ್ನು ಭೇಟಿಯಾಗಿ ನನ್ನ ಮನದಿಂಗಿತ ವ್ಯಕ್ತಪಡಿಸಿದಾಗ ಅವರೆಲ್ಲರು ಒಮ್ಮನಸ್ಸಿನಿಂದ ಬೆಂಬಲ ವ್ಯಕ್ತಪಡಿಸಿದ್ದಾರೆಂದು ನುಡಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವ್ವೇರಹಳ್ಳಿಯವನಾದ ನನಗೆ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಜನ ಸಂಪರ್ಕ ಇರುವುದರೊಂದಿಗೆ ನನ್ನ ತಾತನ ಸ್ವ-ಗ್ರಾಮ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಣ ಗನಹಳ್ಳಿ ಆಗಿದ್ದು ಇದು ನನಗೆ ವರದಾನವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯನಾಗಿ ಸ್ಪರ್ಧೆ ಮಾಡಲು ಪಕ್ಷ ಅವಕಾಶ ಕಲ್ಪಿಸಿ ನಾನು ಚುನಾಯಿತನಾದರೆ ಸರ್ಕಾರದಿಂದ ಬರುವ ಸಂಬಳ ಮತ್ತು ಇತರ ವೆಚ್ಚಗಳ ಹಣದ ಜೊತೆಗೆ ಪ್ರತಿ ತಿಂಗಳು ವೈಯಕ್ತಿಕವಾಗಿ ಒಂದು ಲಕ್ಷ ರೂಗಳನ್ನು ಶಿಕ್ಷಕರ ಕಲ್ಯಾಣ ನಿಧಿಗೆ ನೀಡುವುದಾಗಿ ಪ್ರಕಟಿಸಿದರು.