ಬೆಂಗಳೂರು : ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ, ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರಿ ಸುಮಾ ಸಾಹುಕಾರ್ ಅವರಿಗೆ ವಿಧಾನಸೌಧ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಕೆಪಿಎಸ್ಸಿ ಸಹಾಯಕ ಕಾರ್ಯದರ್ಶಿ ನೀಡಿದ ದೂರಿನ ಆಧಾರದ ಮೇಲೆ, ಸರ್ಕಾರಿ ಹುದ್ದೆ ಪಡೆಯಲು ತಂದೆಯ ಪ್ರಭಾವ ಬಳಸಿ ಸುಳ್ಳು ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸಲ್ಲಿಸಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯ ಭಾಗವಾಗಿ ಸುಮಾ ಸಾಹುಕಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾ ಸಾಹುಕಾರ್ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ಶುಲ್ಕ ವಿನಾಯಿತಿ ಪಡೆಯುವ ಉದ್ದೇಶದಿಂದ ವಾರ್ಷಿಕ ಆದಾಯ ಕೇವಲ 40 ಸಾವಿರ ರೂಪಾಯಿ ಎಂದು ಉಲ್ಲೇಖಿಸಿರುವ ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರೆಂಬ ಆರೋಪ ಕೇಳಿಬಂದಿದೆ.
ದಾಖಲೆಗಳ ಪರಿಶೀಲನೆ ವೇಳೆ 3ಬಿ ಮೀಸಲಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣಪತ್ರದಲ್ಲಿ ವಾರ್ಷಿಕ ಆದಾಯ 40 ಸಾವಿರ ರೂಪಾಯಿ ಎಂದು ನಮೂದಿಸಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



