ಬೆಂಗಳೂರು : ಬಹುನಿರೀಕ್ಷಿತ ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದ ಡಿಪಿಆರ್ (ವಿವರವಾದ ಯೋಜನಾ ವರದಿ) ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನಿನ್ನೆ ಸಂಜೆ (ಮೇ.22) ವಿಧಾನಸೌಧದಲ್ಲಿ ಈ ವರದಿಯನ್ನು ಸ್ವೀಕರಿಸಿದರು.
ಈ ಯೋಜನೆ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಡಿಪಿಆರ್ ಸಿದ್ಧಪಡಿಸಲಾಗಿದೆ.
ಈ ಕುರಿತು ಮಾತನಾಡಿದ ಡಾ.ಪರಮೇಶ್ವರ್, ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ಕಾರ್ಯ ಸಾಧ್ಯತಾ ಅಧ್ಯಯನ ನಡೆಸುವುದಾಗಿ ಘೋಷಿಸಿದ್ದರು ಎಂದು ಹೇಳಿದರು.
ಹೈದರಾಬಾದ್ ಮೂಲದ ಸಂಸ್ಥೆಯೊಂದರಿಂದ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗಿದ್ದು, ಮಾದಾವರದಿಂದ ತುಮಕೂರಿನವರೆಗೆ ಮೆಟ್ರೋ ಯೋಜನೆ ಜಾರಿಗೊಳಿಸಬಹುದು ಎಂಬ ಶಿಫಾರಸು ಅದರಲ್ಲಿ ನೀಡಲಾಗಿದೆ ಎಂದು ವಿವರಿಸಿದರು.
ನಂತರ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ನೀಡಲಾಗಿದ್ದು, ಬಿಎಮ್ಆರ್ಸಿಎಲ್ ಮತ್ತೊಂದು ಸಂಸ್ಥೆಯ ಮೂಲಕ ಯೋಜನಾ ವರದಿ ತಯಾರಿಸಿದೆ. ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಜಾರಿಗೊಳಿಸುವ ಉದ್ದೇಶವಿದ್ದು, ಅಂದಾಜು ವೆಚ್ಚವನ್ನು ಸುಮಾರು 20 ಸಾವಿರ ಕೋಟಿ ರೂ. ಎಂದು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಮುಂದಿನ ಸಂಪುಟ ಸಭೆಯಲ್ಲಿ ವರದಿ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಳಿಕ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.



