ಬೆಳಗಾವಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು 2162 ರೂ.ನಿಂದ 3153 ರೂ.ಗೆ ಭಾರೀ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಜನವಿರೋಧಿಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ಪ್ರಮಾಣದ ಬೆಲೆ ಏರಿಕೆ ಹಿಂದೆಂದೂ ಕಂಡಿಲ್ಲ ಎಂದರು. ಚುನಾವಣೆಗಳು ಮುಗಿದ ತಕ್ಷಣ ಈ ರೀತಿಯ ನಿರ್ಧಾರ ಕೈಗೊಳ್ಳುವುದು ಜನರಿಗೆ ನೀಡಿದ ಭರವಸೆಗಳನ್ನು ಮರೆತಂತಾಗಿದೆ ಎಂದು ಕಿಡಿಕಾರಿದರು. ಈ ಏರಿಕೆ ಹೊಟೇಲ್ ಉದ್ಯಮ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದರು. ಈಗಾಗಲೇ ಒತ್ತಡದಲ್ಲಿರುವ ಹೋಟೆಲ್ ಮಾಲಕರು ಮತ್ತಷ್ಟು ಸಂಕಷ್ಟಕ್ಕೊಳಗಾಗಲಿದ್ದಾರೆ.
ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಜನರ ದಿನನಿತ್ಯ ಜೀವನ ಕಷ್ಟಕರವಾಗಲಿದೆ ಎಂದು ಹೇಳಿದರು. ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



