ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ: ಸಿಎಂ ಆಪ್ತ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಗೆ ಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಹೈಕಮಾಂಡ್ ನಿರ್ಧಾರದತ್ತ ಈಗ ಎಲ್ಲರ ಚಿತ್ತ ನೆಟ್ಟಿದ್ದು, ಪಕ್ಷದ ಆಂತರಿಕ ರಾಜಕೀಯ ಬೆಳವಣಿಗೆಗಳು ಜಾರಕಿಹೊಳಿ ಬಣದಲ್ಲಿ ಚರ್ಚೆಗೆ ಕಾರಣವಾಗಿವೆ. ಸಚಿವ ಸ್ಥಾನದಲ್ಲೇ ಇರುವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟವೂ ಸಿಗಬಹುದು ಎಂಬ ಗುಸುಗುಸು ಕೇಳಿಬರುತ್ತಿದೆ.
ಈ ಹಿಂದೆ ವೀರಶೈವ ಲಿಂಗಾಯತ ಸಮುದಾಯದ ವಿ.ಎಸ್. ಕೌಜಲಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಆ ಸಮುದಾಯಕ್ಕೆ ಅವಕಾಶ ಸಿಕ್ಕಿತ್ತು. ಇದೀಗ ಅಹಿಂದ ಸಮುದಾಯದ ನಾಯಕನಿಗೆ ಅಧ್ಯಕ್ಷ ಸ್ಥಾನ ಸಿಗಬಹುದು ಎಂಬ ಚರ್ಚೆ ಆರಂಭವಾಗಿದೆ.ಸಿಎಂ ಸಿದ್ದರಾಮಯ್ಯ ಅವರ ಆಪ್ತ ಶಿಷ್ಯರಾಗಿರುವ ಸತೀಶ್ ಜಾರಕಿಹೊಳಿ ಹೆಸರು ಈಗ ಮತ್ತೆ ಗಿರಕಿ ಹೊಡೆಯುತ್ತಿದೆ.
ಈ ಹಿಂದೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಅಹಿಂದ ನಾಯಕತ್ವವನ್ನು ಸತೀಶ್ ಜಾರಕಿಹೊಳಿ ವಹಿಸಿಕೊಳ್ಳಬೇಕು ಎಂದು ಹೇಳಿದ್ದರು. ಅದರಿಂದಲೇ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆಯಲ್ಲಿ ಅವರ ಹೆಸರು ಕೇಳಿಬರುತ್ತಿದೆ.ಕೆಲವು ದಿನಗಳಿಂದ ಸೈಲೆಂಟ್ ಆಗಿರುವ ಸತೀಶ್ ಜಾರಕಿಹೊಳಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಹೈಕಮಾಂಡ್ ನಿರ್ಧಾರದತ್ತ ಕಣ್ಣು ಹಾಕಿದ್ದಾರೆ ಎನ್ನುವ ಚರ್ಚೆಗಳು ರಾಜ್ಯದಲ್ಲಿ ನಡೆಯುತ್ತಿವೆ.



