ಚಿಂತಾಮಣಿ : ನಗರದ ರಾಮಕುಂಟೆಯಲ್ಲಿ ನಿರ್ಮಾಣವಾಗುತ್ತಿರುವ 32 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಖಾಸಗಿ ಬಸ್ ಟರ್ಮಿನಲ್ ಹಾಗೂ ವಾಹನ ದುರಸ್ತಿ ಕೇಂದ್ರ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ದಿಢೀರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಶೀಘ್ರಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ವಿನ್ಯಾಸ ಮತ್ತು ಗುಣಮಟ್ಟವನ್ನು ಸಚಿವರು ಸೂಕ್ಷ್ಮವಾಗಿ ಪರಿಶೀಲಿಸಿ, ಯಾವುದೇ ಕಾರಣಕ್ಕೂ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಲ್ಲದೆ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ಬೃಹತ್ ಯೋಜನೆ ರೂಪಿಸಲಾಗಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು. ಈ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದ ಸಚಿವರು, ಬಸ್ ಟರ್ಮಿನಲ್ ಮತ್ತು ವಾಹನ ದುರಸ್ತಿ ಕೇಂದ್ರದಿಂದ ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರುವುದರ ಜೊತೆಗೆ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಇನ್ನು ಅಭಿವೃದ್ಧಿ ಕಾಮಗಾರಿಗಳ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವೆಂದು ತಿಳಿಸಿದ ಅವರು, ಕಾಮಗಾರಿಗೆ ಸಂಬಂಧಿಸಿದಂತೆ ಜನರಲ್ಲಿ ಇದ್ದ ಗೊಂದಲ ಹಾಗೂ ಸಂಶಯಗಳಿಗೆ ಸ್ಥಳದಲ್ಲೇ ಸ್ಪಷ್ಟನೆ ನೀಡಿ ಗಮನ ಸೆಳೆದರು.



