ನವದೆಹಲಿ : ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮಗಳನ್ನು ಎದುರಿಸಲು ನಾಗರಿಕರು ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಚಿನ್ನ ಖರೀದಿಸಬೇಡಿ, ವಿದೇಶ ಪ್ರವಾಸ ಕಡಿಮೆ ಮಾಡಿ, ಕಡಿಮೆ ಪೆಟ್ರೋಲ್ ಬಳಸಿ, ರಸಗೊಬ್ಬರ ಮತ್ತು ಅಡುಗೆ ಎಣ್ಣೆ ಬಳಕೆಯನ್ನು ಇಳಿಸಿ, ಮೆಟ್ರೋ ಬಳಸಿರಿ ಹಾಗೂ ಮನೆಯಿಂದಲೇ ಕೆಲಸ ಮಾಡಿ ಎಂಬ ಪ್ರಧಾನಿ ಮಾತುಗಳು ಸಲಹೆಗಳಲ್ಲ; ಅವು ವೈಫಲ್ಯದ ಪುರಾವೆಗಳು ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಕಳೆದ 12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಂದು ನಿಲ್ಲಿಸಲಾಗಿದೆ. ಈಗ ಜನರು ಏನು ಖರೀದಿಸಬೇಕು, ಎಲ್ಲಿಗೆ ಹೋಗಬೇಕು ಎಂಬುದನ್ನೂ ಸರ್ಕಾರವೇ ಹೇಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಅಲ್ಲದೆ ಪ್ರಧಾನಿ ಪದೇ ಪದೇ ಸಾರ್ವಜನಿಕರ ಮೇಲೆಯೇ ಜವಾಬ್ದಾರಿ ಹಾಕಿ ತಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ರಾಜಿ ಮಾಡಿಕೊಂಡ ಪ್ರಧಾನಿ ಇನ್ನು ಮುಂದೆ ದೇಶವನ್ನು ಮುನ್ನಡೆಸಲು ಸಮರ್ಥರಲ್ಲ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷವೂ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ನಡೆಸಿದೆ. ಜಾಗತಿಕ ಬಿಕ್ಕಟ್ಟಿನ ಪರಿಣಾಮದಿಂದ ದೇಶದ ಆರ್ಥಿಕತೆಯನ್ನು ರಕ್ಷಿಸಲು ಸಮಗ್ರ ಆಕಸ್ಮಿಕ ಯೋಜನೆ ರೂಪಿಸುವ ಬದಲು, ಜನರ ಮೇಲೆಯೇ ಹೊರೆ ಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಜನರನ್ನು ಅನಾನುಕೂಲತೆಗೆ ತಳ್ಳುವುದು ನಾಚಿಕೆಯಿಲ್ಲದ, ಅಜಾಗರೂಕ ಮತ್ತು ಅನೈತಿಕ ನಡೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.



