ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಜಗವಾಗಿದ್ದು, ಕೋಪದಲ್ಲಿ ಪತ್ನಿ ತನ್ನ ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿದ್ದಾಳೆ ಬಳಿಕ ತಾನೂ ಅದನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ನಾಲ್ಕು ವರ್ಷದ ನಿವೇದ್ ಚೌದರಿ ಮತ್ತು ಎರಡು ವರ್ಷದ ನಿರ್ಮಲ್ ಚೌದರಿ ಎಂಬ ಬಾಲಕರು ಮೃತಪಟ್ಟಿದ್ದಾರೆ. ಸದ್ಯ ಆತ್ಮಹತ್ಯೆಗೆ ಯತ್ನಿಸಿದ ತಾಯಿ ಪವಿತ್ರಾ ಸ್ಥಿತಿ ಗಂಭೀರವಾಗಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಲತಃ ಪಾವಗಡದವರಾದ ಪ್ರಶಾಂತ್ ಎಂಬುವವರು ಕಳೆದ ಐದಾರು ವರ್ಷಗಳಿಂದ ಮತ್ತಿಕೆರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮತ್ತು ಪತ್ನಿ ಪವಿತ್ರಾ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.
ಶನಿವಾರ ಸಂಜೆ ಕೂಡ ದಂಪತಿ ನಡುವೆ ಜೋರಾಗಿ ಜಗಳ ನಡೆದಿದ್ದು, ಇದರಿಂದ ತೀವ್ರ ಮನನೊಂದ ಪವಿತ್ರಾ ರಾತ್ರಿ ವೇಳೆ ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ಬಳಿಕ ತಾನೂ ಸೇವಿಸಿದ್ದಾರೆ.
ಇಂದು ಮುಂಜಾನೆ ಪ್ರಶಾಂತ್ ಎದ್ದಾಗ ಪತ್ನಿ ಮತ್ತು ಮಕ್ಕಳು ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಮಕ್ಕಳಿಬ್ಬರು ಮೃತಪಟ್ಟಿರುವುದಾಗಿ ವೈದ್ಯರು ದೃಡಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



