ಮೈಸೂರು: ನಾಡಿನ ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ಇಂದು ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಭಕ್ತಿ ಹಾಗೂ ಶ್ರದ್ಧೆಯಿಂದ ಚಾಲನೆ ನೀಡಿದೆ. ಬುಕರ್ ಪ್ರಶಸ್ತಿ ಪುರಸ್ಕೃತ ಖ್ಯಾತ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ನೆರವೇರಿಸುತ್ತಿದ್ದು, ಅದಕ್ಕೂ ಮೊದಲು ನಾಡದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ವಿಶೇಷ ಪೂಜೆ ಸಲ್ಲಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ, ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ.
ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.
ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.