ಮೈಸೂರು : ಮಹಿಳಾ ಸಂಚಾರಿ ಪೊಲೀಸ್ ಅಧಿಕಾರಿಯ ಮಗ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಡಿಕ್ಕಿಯಾಗಿ ದನಗಾಹಿ ವೃದ್ಧ ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹಿಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಮೃತ ವೃದ್ಧನನ್ನು ಗುರುಸ್ವಾಮಿ (೬೫) ಎಂದು ಗುರುತಿಸಲಾಗಿದೆ. ಗಾಯಾಳು ಗೋವಿಂದ ರಾಜು ಅವರನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಹೀಲಿಂಗ್ ಮಾಡುತ್ತಿದ್ದ ಸೈಯದ್ ಐಮಾನ್ನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೃತ ಗುರುಸ್ವಾಮಿ ಮತ್ತು ಗೋವಿಂದರಾಜು ಅವರು ಹಿಮ್ಮಾವು ಕೈಗಾರಿಕಾ ಪ್ರದೇಶದ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸುತ್ತಾ ರಸ್ತೆ ಬದಿ ಕುಳಿತಿದ್ದರು. ಇಲ್ಲಿ ವ್ಹೀಲಿಂಗ್ ಮಾಡಲು ಸೈಯದ್ ಐಮಾನ್, ಸ್ನೇಹಿತ ಪಂಕಜ್ನೊಂದಿಗೆ ಆಗಮಿಸಿದ್ದರು. ರಸ್ತೆಯಲ್ಲಿ ವ್ಹೀಲಿಂಗ್ ಮಾಡುವಾಗ ರಸ್ತೆ ಬದಿ ಕುಳಿತಿದ್ದ ಗುರುಸ್ವಾಮಿ ಹಾಗೂ ಗೋವಿಂದರಾಜ್ಗೆ ಬೈಕ್ ಗುದ್ದಿದೆ. ತಕ್ಷಣ ಗ್ರಾಮಸ್ಥರು ಗಾಯಗೊಂಡ ಇಬ್ಬರನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಗುರುಸ್ವಾಮಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸುವಾಗ ಅವರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳು ಗೋವಿಂದರಾಜುಗೆ ಚಿಕಿತ್ಸೆ ಮುಂದುವರೆದಿದೆ.
ನಂಜನಗೂಡಿನ ಹಿಮ್ಮಾವಿನ ಬಳಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೈಕ್ ಸವಾರರನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ.