ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ. ನಾವು ರಾಜ್ಯದ ಜನರ ಆಶೋತ್ತರ ಈಡೇರಿಸಿದ್ದೇವೆ. ಹಾಗಾಗಿ ಜನರು ಕಾಂಗ್ರೆಸ್ ಪರವಾಗಿ ಇದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕುರಿತ ಪ್ರಶ್ನೆಗೆ, ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತದೆ. ಹಾಗೇ ಕಾಂಗ್ರೆಸ್ ಪಕ್ಷದ ಯಾವ ಸದಸ್ಯರೂ ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ, ಎಲ್ಲರಿಗೂ ಒಂದೇ ಸಲ ಅವಕಾಶ ನೀಡಲು ಸಾಧ್ಯವಿಲ್ಲ. ಈಗ ಅವಕಾಶ ದೊರೆಯದ ಆಕಾಂಕ್ಷಿಗಳಿಗೆ ಮುಂದೆ ನ್ಯಾಯ ಕೊಡಿಸುವ ಕೆಲಸವನ್ನು ಪಕ್ಷ ಮಾಡುತ್ತದೆ ಎಂದು ಹೇಳಿದರು.
ಇನ್ನೂ ಕರ್ನಾಟಕ ಜನರು ನಮ್ಮ ಪರ ಇದ್ದಾರೆ. ಎರಡೂ ಕ್ಷೇತ್ರಗಳ ಉಪಚುನಾವಣೆ ಗೆಲ್ಲುತ್ತೇವೆ. ಹಿಂದೆಯೂ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ. ಗೆಲುವೇ ಪ್ರಮುಖ ಮಾನದಂಡ. ಈ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಯಾರಿಗೇ ಟಿಕೆಟ್ ನೀಡಿದರೂ ಇತರೆ ಎಲ್ಲ ಆಕಾಂಕ್ಷಿಗಳು ಒಟ್ಟಿಗೆ ಸೇರಿ ಪಕ್ಷದ ಗೆಲುವಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.



