ಮೈಸೂರು: ಎನ್ಆರ್ ಪೊಲೀಸ್ ಠಾಣೆಗೆ 10 ಸಿಸಿ ಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ರೇಹಾನ್ ಬೇಗ್ ಅವರು ಮತ್ತೆ ಉದಯಗಿರಿ ಪೊಲೀಸ್ ಠಾಣೆಗೆ 10 ಸಿಸಿ ಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದರು.
ದೇವರಾಜ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಕೆ.ರಾಜೇಂದ್ರ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಉದಯಗಿರಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಎನ್.ಸುಧಾಕರ್ ಅವರು ಇದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರೇಹಾನ್ ಬೇಗ್ ಅವರು, ಎನ್ಆರ್ ಕ್ಷೇತ್ರದ ಶಾಸಕರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಮತ್ತು ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಮೂರ್ತಿ ಅವರ ಮಾರ್ಗದರ್ಶನದ ಮೇರೆಗೆ ಈಗಾಗಲೇ ನಾನು ಎರಡು ಪೊಲೀಸ್ ಠಾಣೆಗಳಿಗೆ ೨೦ ಸಿಸಿ ಟಿವಿ ಕ್ಯಾಮೆರಾಗಳನ್ನು ಕೊಡುಗೆಯಾಗಿ ನೀಡಿದ್ದೇವೆ.
ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳು ಬರುತ್ತಿರುವ ಕಾರಣ ಎನ್ಆರ್ ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಮತ್ತು ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ಷ್ಮ ಸ್ಥಳಗಳಲ್ಲಿ ಈ ಸಿಸಿ ಟಿವಿ ಕ್ಯಾಮೆರಾಗಳನ್ನು ಬಳಸಲು ನೀಡಲಾಗಿದೆ. ನಮ್ಮ ಉದ್ದೇಶ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು, ಒಂದು ವೇಳೆ ನಡೆದರೂ ಅದು ಯಾರಿಂದ ನಡೆದಿದೆ ಎಂದು ಗೊತ್ತಾಗಬೇಕು. ಯಾರೂ ಸಹ ಅಹಿತಕರ ಘಟನೆ ನಡೆಸಲು ಮುಂದಾಗುದಿಲ್ಲ, ಆದರೇ, ಕೆಲವೊಮ್ಮೆ ಅಚಾನಕ್ಕಾಗಿ ನಡೆಯಬಹುದಾದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಕ್ಯಾಮೆರಾ ನೀಡಲಾಗಿದೆ. ಪೊಲೀಸರು ಇದರ ಸದ್ಬಳಕೆ ಮಾಡಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುತ್ತಾರೆ ಎಂಬ ನಂಬಿಕೆ ನಮಗಿದೆ ಎಂದರು.
ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಇಕ್ಬಾಲ್ ಅವರು ಮಾತನಾಡಿ, ಎನ್ಆರ್ ಕ್ಷೇತ್ರದಲ್ಲಿ ಶಾಂತಿ ಕಾಪಾಡಬೇಕು ಎಂಬ ಸದುದ್ದೇಶದಿಂದ ರೇಹಾನ್ ಬೇಗ್ ಅವರು ಈ ಕೊಡುಗೆ ನೀಡಿದ್ದಾರೆ. ಇದು ಶ್ಲಾಘನೀಯವಾದ ಕೆಲಸ, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಇವುಗಳನ್ನು ಅಳವಡಿಕೊಂಡು ಶಾಂತಿ ಸೌಹಾರ್ಧತೆ ಕಾಪಾಡಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಶೌಕತ್ ಅಲಿ ಖಾನ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿ ಸೈಯದ್ ಫಾರೂಖ್, ಲೇಬರ್ ಸೆಲ್ ಅಧ್ಯಕ್ಷರಾದ ಮೊಹಮ್ಮದ್ ಶಿಫ್ಟನ್, ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಗುಂಡ, ಉಮೇಶ್ ಮತ್ತಿತರರು ಇದ್ದರು.