ಚಾಮರಾಜನಗರ: ಸಮಾಜದಲ್ಲಿ ನಾಗರಿಕ ಹಕ್ಕುಗಳೊಂದಿಗೆ ಎಲ್ಲಾ ವರ್ಗಗಳಿಗೂ ಸಮಾನತೆಯಿಂದ ಬದುಕಲು ಅವಕಾಶ ನೀಡಿರುವ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಜಾ ಪರಿವರ್ತನಾ ವೇದಿಕೆ ಸಹಯೋಗದಲ್ಲಿ ನಮ್ಮ ಸಂವಿಧಾನ ನಮ್ಮ ಹೆಮ್ಮೆ-ಸಂವಿಧಾನ ಜಾಗೃತಿ ವರ್ಷ-2024ರ ಅಂಗವಾಗಿ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ-1989 ಹಾಗೂ ನಿಯಮಗಳು-1995ರ ಕುರಿತು ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ಒಂದು ಪುಣ್ಯಗ್ರಂಥವಾಗಿದ್ದು, ಸಮ ಸಮಾಜದ ಉದ್ದೇಶಕ್ಕಾಗಿಯೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ್ದಾರೆ. ನಾವೆಲ್ಲರು ಸಂವಿಧಾನದಡಿಯಲ್ಲಿ ಬದುಕಬೇಕು. ಸಂವಿಧಾನದ ಆಶೋತ್ತರಗಳನ್ನು ಈಡೇರಿಸಲು ಯುವಜನತೆ ಸಂವಿಧಾನವನ್ನು ಅಧ್ಯಯನ ಮಾಡುವುದರ ಜೊತೆಗೆ ಸಂವಿಧಾನದ ಆಶಯಗಳು, ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ವರ್ಷವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಜಿಲ್ಲೆಯಾದ್ಯಂತ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 26ರಂದು ಸಂವಿಧಾನ ಪೀಠಿಕೆ ಓದುವ ಮೂಲಕ ಆರಂಭಗೊಂಡ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ವ್ಯಾಪಕ ಅರಿವು ಮೂಡಿಸಿವೆ. ಸಂವಿಧಾನ ಜಾಗೃತಿ ಕಾರ್ಯಕ್ರಮ ಜಿಲ್ಲೆಯಲ್ಲಿ ಸಾರ್ಥಕಗೊಂಡಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಹಾಗೂ ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಪುಟ್ಟಸ್ವಾಮಿ ಅವರು ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ-1989 ಹಾಗೂ ನಿಯಮಗಳು-1995ರ ಕುರಿತು ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ವಿಚಾರ ಮಂಡಿಸಿದರು.
ನಳಂದ ಬೌದ್ಧ ವಿಶ್ವವಿದ್ಯಾಲಯದ ತಿಸ್ಸ ಬಂತೇಜೀ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕರಾದ ಚಿಕ್ಕಬಸವಯ್ಯ, ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿ.ಎಂ. ಕೃಷ್ಣಮೂರ್ತಿ, ಇತರರು ಕಾರ್ಯಕ್ರಮದಲ್ಲಿ ಇದ್ದರು. ಆರಂಭದಲ್ಲಿ ಜನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ ಮತ್ತು ತಂಡ ನಡೆಸಿಕೊಟ್ಟ ಭೀಮಗೀತೆ ಗಾಯನ ಎಲ್ಲರ ಗಮನ ಸೆಳೆಯಿತು.