ತುಮಕೂರು: ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ. ಎನ್. ರಾಜಣ್ಣ ಹೇಳಿಕೆ ನೀಡಿದರು. ಅದರ ಬೆನ್ನಲ್ಲೇ ಇದೀಗ ಪಿಡಬ್ಲ್ಯೂಡಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ರಾಜಣ್ಣ, “ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ಸಂಭವಿಸಬಹುದು. ಈ ಸಂಬಂಧ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಸತೀಶ್ ಜಾರಕಿಹೊಳಿ ಅವರ ಹೆಸರು ಈ ಸ್ಥಾನಕ್ಕೆ ಮುಂದಾಗಬಹುದು” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಿಎಂ ಪದವಿಗಾಗಿ ಕುರಿತಂತೆ ಪ್ರತಿಕ್ರಿಯಿಸಿದ ರಾಜಣ್ಣ, “ಡಿಕೆ ಶಿವಕುಮಾರ್ ಸಿಎಂ ಆದರೂ ಒಳ್ಳೆಯದೇ. ಅವರು ಪಿಎಂ ಆದರೂ ನಮಗೆ ಅಷ್ಟೇ ಸಂತೋಷ. ಆದರೆ, ಅಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸಂಪೂರ್ಣವಾಗಿ ಹೈಕಮಾಂಡ್ನ ಹೊಣೆ. ಯಾರಿಗೆ ಯಾವ ಸ್ಥಾನ ಕೊಡಬೇಕೆಂಬ ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದರು.