ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ಪಟ್ಟಿಗೆ ಸಂಬಂಧಿಸಿದ ಫಾರ್ಮ್ಗಳ ವಿತರಣೆ, ವಿಳಾಸದ ವ್ಯತ್ಯಾಸಗಳು ಮತ್ತು ಸಾರ್ವಜನಿಕರ ದೂರುಗಳ ಕುರಿತು ಎದುರಾದ ಪ್ರಶ್ನೆಗಳಿಗೆ ಸಮಗ್ರ ಮಾಹಿತಿ ನೀಡಿದರು. “ಮತದಾರರ ಪಟ್ಟಿಗೆ ಸಂಬಂಧಿಸಿದ ಒಂದೇ ಒಂದು ಫಾರ್ಮ್ ಸಹ ತಪ್ಪು ಪೋಲಿಂಗ್ ಸ್ಟೇಷನ್ಗೆ ತಲುಪಿಲ್ಲ. ಈ ಪ್ರಕ್ರಿಯೆಯು ಅತ್ಯಂತ ನಿಖರವಾಗಿ ನಡೆಯುತ್ತಿದೆ,” ಎಂದು ಅವರು ತಿಳಿಸಿದರು.
ಮತದಾರರಿಗೆ ಸುಲಭವಾಗಿ ಸೇವೆ ಒದಗಿಸಲು ಮತ್ತು ಪ್ರಕ್ರಿಯೆಯನ್ನು ವೇಗಗೊಳಿಸಲು ಆಯೋಗವು ಹಲವು ಕ್ರಮಗಳನ್ನು ಜಾರಿಗೊಳಿಸಿದೆ. ಪ್ರತಿ ಗ್ರಾಮ ಮಟ್ಟದಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ತಾಂತ್ರಿಕ ಸಮಸ್ಯೆಗಳು ಮತ್ತು ನೆಟ್ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿರುವ ಬಿಎಲ್ಒಗಳಿಗೆ (BLO) ನೆರವಾಗಲು ಪ್ರತಿ ತಾಲ್ಲೂಕಿನಲ್ಲಿ ಎರಡು ಅಥವಾ ಮೂರು ಪ್ರತ್ಯೇಕ ಫೆಸಿಲಿಟೇಶನ್ ಕೇಂದ್ರಗಳನ್ನು ತೆರೆಯಲಾಗಿದೆ. ನಗರ ಭಾಗದ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಾರಾಂತ್ಯದ ದಿನಗಳಾದ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದೂರುಗಳಿಗೆ ತ್ವರಿತ ಪರಿಹಾರ
ಮತದಾರರ ಪಟ್ಟಿಯ ವಿಷಯದಲ್ಲಿ ಯಾವುದೇ ರೀತಿಯ ದೂರುಗಳು ಬಂದರೂ, ಅವುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು. “ಪ್ರತಿಯೊಬ್ಬ ಮತದಾರರಿಗೂ ಫಾರ್ಮ್ ಭರ್ತಿ ಮಾಡಲು ಮತ್ತು ಅದನ್ನು ಹಿಂತಿರುಗಿಸಲು ಅಗತ್ಯವಿರುವ ಎಲ್ಲ ರೀತಿಯ ಸಹಾಯ ಮತ್ತು ಮಾರ್ಗದರ್ಶನ ನೀಡುವುದೇ ನಮ್ಮ ಪ್ರಮುಖ ಗುರಿಯಾಗಿದೆ,” ಎಂದು ಅನ್ಬು ಕುಮಾರ್ ತಿಳಿಸಿದರು.
ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅಗತ್ಯವಿರುವ ದಾಖಲಾತಿಗಳನ್ನು ಸರಿಯಾಗಿ ನೋಂದಾಯಿಸಿಕೊಳ್ಳುವಂತೆ ಮತ್ತು ಚುನಾವಣಾ ಆಯೋಗದ ಈ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.



