ಬೆಂಗಳೂರು: ಬಿಎಸ್ಸಿ ಓದುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿನ ಒಂದು ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೊರವಲಯ ಬೊಮ್ಮಸಂದ್ರದಲ್ಲಿ ನಡೆದಿದೆ.
ಬಿಟಿಎಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಎ.ಪಿ.ಆದಿತ್ಯ ಎಂಬ 19 ವರ್ಷದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣು ಬಿಗಿದ ಸ್ಥಿತಿಯಲ್ಲಿ ಆದಿತ್ಯನ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
2ನೇ ವರ್ಷದ ಬಿಎಸ್ಸಿ ನರ್ಸಿಂಗ್ ಓದುತಿದ್ದ ಆದಿತ್ಯ, ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಹಪಾಠಿಗಳು ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾಲೇಜು ಆಡಳಿತ ಮಂಡಳಿ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ಆದಿತ್ಯ ತಂದೆ ಪ್ರದೀಪ್ ಆರೋಪಿಸಿದ್ದು, ಸೂಕ್ತ ತನಿಖೆ ನಡೆಸಿ ಮಗನಿಗೆ ನ್ಯಾಯ ಕೊಡಿಸಿ ಎಂದು ಆಗ್ರಹಿಸಿದ್ದಾರೆ.
ಮಾದಕವಸ್ತು ಸೇವನೆ ಕೇಸ್ನಲ್ಲಿ ಮಗನನ್ನು ಸಿಲುಕಿಸಿ ವಿದ್ಯಾರ್ಥಿಗಳ ಮುಂದೆ ಅವಮಾನಿಸಿ ಮಾನಸಿಕ ಹಿಂಸೆ ನೀಡಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆದಿತ್ಯ ತಂದೆ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



