ಮೈಸೂರು: ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿಯನ್ನ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿ ಅಧ್ಯಯನ ನಡೆಸಿದರೆ ಉನ್ನತ ಸ್ಧಾನಮಾನವನ್ನು ಪಡೆದು ಸಮಾಜದಲ್ಲಿ ಒಳ್ಳೆಯ ಹೆಸರು ಗಳಿಸಬಹುದು ಎಂದು ಸಹಾಯಕ ಪ್ರಾಧ್ಯಾಪಕ ಹಾಗೂ ಮೈಸೂರು ಆಡಳಿತ ತರಬೇತಿ ಸಂಸ್ಧೆಯ ಸಂಪನ್ಮೂಲ ವ್ಯಕ್ತಿ ಡಾ. ಪರಶಿವಮೂರ್ತಿ ಹೇಳಿದರು.
ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಂಘದ ೨೦೨೩-೨೪ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಪೋಷಕರಲ್ಲಿ ಹಲವಾರು ಕಷ್ಟ ಕಾರ್ಪಣ್ಯಗಳು ಹಾಗೂ ಹಲವು ತೊಂದರೆಗಳಿದ್ದರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ಆರ್ಥಿಕ ಮತ್ತು ಶೈಕ್ಷಣಿಕ ನೆರವನ್ನ ಒದಗಿಸುತ್ತಿದ್ದಾರೆ ಆದರೆ ವಿದ್ಯಾರ್ಥಿಗಳು ಮೊಬೈಲ್ ಚಾಳಿಗೆ ಬಿದ್ದು ತಮ್ಮ ಶೈಕ್ಷಣಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾಧಿಸಿದರು.
ಮೊಬೈಲ್ ಹಾಗೂ ಸಾಮಾಜಿಕ ಜಾಲ ತಾಣಗಳಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಳೆಹೀನರಾಗುತ್ತಿದ್ದು ಅವರ ಭವಿಷ್ಯವನ್ನ ಚಿಕ್ಕ ವಯಸ್ಸಿನಲ್ಲಿ ಹಾಳು ಮಾಡಿಕೊಂಡು ದುಶ್ಚಟಗಳಿಗೆ ದಾಸರಾಗಿ ತಮ್ಮ ಜೀವನವನ್ನ ಅಂತ್ಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ ಎಂದ ಅವರು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಎಂ.ಹೆಚ್.ಚನ್ನೇಗೌಡ ವಿದ್ಯಾಸಂಸ್ಧೆಯ ಅಧ್ಯಕ್ಷ ಎಂ. ಸ್ವರೂಪ್ ಚಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆಗೆ ಸೀಮಿತವಾಗದೇ ಉತ್ತಮವಾದ ನಡವಳಿಕೆ ಹಾಗೂ ಅಭ್ಯಾಸಗಳನ್ನ ಬೆಳೆಸಿಕೊಂಡು ಸುಸಂಸ್ಕೃತರಾಗಿ ರೂಪುಗೊಳ್ಳಬೇಕು ಎಂದ ಅವರು ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಪದವಿಪೂರ್ವ ಹಂತ ಬಹುಮುಖ್ಯವಾಗಿದ್ದು ಪರೀಕ್ಷಾ ಸಮಯ ಸಮೀಪಿಸುತ್ತಿರುವುದರಿಂದ ಉತ್ತಮ ಆರೋಗ್ಯಕರವಾದ ಪೋಷ್ಟಿಕ ಆಹಾರಗಳನ್ನು ಸೇವಿಸಿ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನ ಕಾಪಾಡುವುದರ ಮೂಲಕ ಶಿಕ್ಷಕರ ಮಾರ್ಗದರ್ಶನದಲ್ಲಿ ಪರೀಕ್ಷೆಯನ್ನ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಳ್ಳುವುದರ ಮೂಲಕ ತಂದೆ-ತಾಯಿಗಳಿಗೆ, ಗುರುಗಳಿಗೆ ಹಾಗೂ ಸಂಸ್ಧೆಗೆ ಕೀರ್ತಿ ತರಬೇಕೆಂದು ಅವರು ಹೇಳಿದರು.
ಈ ವೇಳೆ ಸಂಸ್ಧೆಯ ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಕೆ.ಎಸ್.ಸುನೀಲ್ ಕುಮಾರ್, ಮಾಜಿ ಕ.ಸಾ.ಪ ಅಧ್ಯಕ್ಷ ವಿ.ಹರ್ಷ, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ ಯು.ಎಸ್. ಶಿವಕುಮಾರ್, ಉಪ ಪ್ರಾಂಶುಪಾಲರಾದ ಜಿ.ಎಸ್.ನಂದಿನಿ, ರಾ.ಸೇ.ಯೋ ಅಧಿಕಾರಿ ಹೆಚ್.ಎಸ್. ಪಂಚಲಿಂಗೇಗೌಡ, ಕ್ರೀಡಾ ಕಾರ್ಯದರ್ಶಿ ಜಿ. ಸುರೇಂದ್ರ, ಅಧ್ಯಾಪಕ ಕಾರ್ಯದರ್ಶಿ ಎನ್. ರೇವಣ್ಣ, ಕನ್ನಡ ಸಂಘದ ಕಾರ್ಯದರ್ಶಿ ಎಸ್. ಪ್ರೇಮಕುಮಾರಿ ಸೇರಿದಂತೆ ಇತರರು ಹಾಜರಿದ್ದರು.