ಗೌರಿಬಿದನೂರು : ಆಧುನಿಕ ಸಮಾಜದಲ್ಲಿ ವಿದ್ಯಾರ್ಥಿಗಳು ಪಠ್ಯ ಶಿಕ್ಷಣದ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯ ಮತ್ತು ಬದುಕಿನ ಮೌಲ್ಯಗಳನ್ನು ಕಲಿತು ಅನುಸರಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಇಂದಿರಾ ಪ್ರಿಯದರ್ಶಿನಿ ಪರಿಸರ ಮಿತ್ರ ಪ್ರಶಸ್ತಿ ಪುರಸ್ಕೃತರಾದ ಎ.ಎಸ್.ಜಗನ್ನಾಥ್ ತಿಳಿಸಿದರು.
ತಾಲೂಕಿನ ಕಡಬೂರು ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಿದ್ದ 7 ದಿನಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಕೃತಿಯು ಮನುಕುಲದ ನೆಮ್ಮದಿಯ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ಅವಶ್ಯಕತೆಗಳನ್ನು ನೀಡುತ್ತಿದೆ.
ಆದರೆ ನಾವುಗಳು ನಿತ್ಯದ ಬದುಕಿನಲ್ಲಿ ಗಾಳಿ, ನೀರು ಮತ್ತು ಮಣ್ಣು ಸೇರಿದಂತೆ ಮುಂದಿನ ಪೀಳಿಗೆಗೆ ಅಗತ್ಯವಿರುವ ನೆರೆಯ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದ್ದು, ಕಾಲೇಜು ಹಂತದಿಂದಲೇ ಪ್ರತಿಯೊಬ್ಬರೂ ಸಾಮಾಜಿಕ ಜವಾಬ್ದಾರಿ ಮತ್ತು ಬದ್ಧತೆ ಅರಿತು ಮೈಗೂಡಿಸಿಕೊಂಡಾಗ ಬದುಕು ಉಜ್ವಲ ವಾಗಿರುತ್ತದೆ ಎಂದು ಹೇಳಿದರು.
ಬಳಿಕ ಪ್ರಗತಿಪರ ರೈತರು ಮತ್ತು ಲಯನ್ಸ್ ಸಂಸ್ಥೆಯ ಸದಸ್ಯರಾದ ಅಶ್ವತ್ಥರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ನೈಸರ್ಗಿಕವಾಗಿ ಲಭ್ಯವಿರುವ ಸಾಕಷ್ಟು ಮೌಲ್ಯಾಧಾರಿತ ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ.
ಆಧುನಿಕ ಜಗತ್ತಿನ ಭಟಾಟೆಯಲ್ಲಿ ಸಾಗುತ್ತಿರುವ ಯುವ ಪೀಳಿಗೆಯು ಕೃಷಿಯ ಬಗ್ಗೆ ಅರಿತು ಅದನ್ನು ಮುಂದುವರೆಸುವ ಕೆಲಸ ಮಾಡಬೇಕಾಗಿದೆ. 7 ದಿನಗಳ ಶಿಬಿರದಲ್ಲಿ ಶಿಸ್ತು, ಸಂಯಮ ಮತ್ತು ಬದ್ಧತೆಯ ಕೌಶಲ್ಯ ಗಳನ್ನು ಕಲಿತರೆ ಮಾತ್ರ ಶಿಬಿರಾರ್ಥಿಗಳ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.
ನಂತರ ಮುನೀಂದ್ರ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿ ಎನ್ಎಸ್ಎಸ್ ಮತ್ತು ಎನ್ಸಿಸಿಯಂತಹ ಶಿಬಿರದಲ್ಲಿ ಭಾಗವಹಿಸುವುದರಿಂದ ಸಾಮಾಜಿಕ ಕಳಕಳಿ ಮತ್ತು ಬದ್ಧತೆಯನ್ನು ಕಲಿಯಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿ ದೆಸೆಯಲ್ಲಿ ಸಾಮಾಜಿಕವಾಗಿ ಶ್ರಮಿಸಿ ಅಗತ್ಯ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಶಿಬಿರದಲ್ಲಿ ಎನ್.ಎಸ್ ಎಸ್ ಶಿಬಿರಾಧಿಕಾರಿ ಕೆ.ಆರ್.ರಂಗನಾಥ್, ಸಹಾಯಕ ಪ್ರಾಧ್ಯಾಪಕ ಡಿ.ಆರ್.ಮಂಜುನಾಥ್, ಉಪನ್ಯಾಸಕ ಡಿ.ಎ.ಕಾಂತರಾಜು ಸೇರಿದಂತೆ ಶಿಬಿರಾರ್ಥಿಗಳು ಭಾಗವಹಿಸಿದ್ದರು.



