ರಾಮನಗರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ವಹಿಸಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಪಕ್ಷಗಳ ರಾಜಕೀಯ ಮುಖಂಡರುಗಳು ಹಾಗೂ ಲೋಕಸಭಾ ಅಭ್ಯರ್ಥಿಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿತಿ ಮಾತನಾಡಿದರು.
ವಿವಿಧ ರಾಜಕೀಯ ಪಕ್ಷಗಳು ನಡೆಸುವ ಸಭೆ, ಸಮಾರಂಭ, ವಾಹನಗಳ ಓಡಾಟಕ್ಕೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವಂತೆ ತಿಳಿಸಿದರು. ೮೦ ಹಾಗೂ ೮೦ ವರ್ಷ ಮೇಲ್ಪಟ್ಟ ಮತದಾರರಿಗೆ ಏಪ್ರಿಲ್ ೧೩, ೧೪ ಹಾಗೂ ೧೬ ರಂದು ಅವರುಗಳ ಮನೆಗಳಿಗೆ ಭೇಟಿನೀಡಿ ಮತದಾನ ಮಾಡಲು ಅನುವು ಮಾಡಿಕೊಡಲಾಗುವುದು ಹಾಗೂ ಅವರುಗಳ ಪಟ್ಟಿಗಳನ್ನು ಸಹ ನೀಡಲಾಗುವುದು ಎಂದು ತಿಳಿಸಿದರು.
ಮನೆಗಳಿಂದ ಮತ ಚಲಾಯಿಸುವವರು ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯದಂತೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಏಜೆಂಟರುಗಳು ಕ್ರಮವಹಿಸುವಂತೆ ತಿಳಿಸಿದರು. ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಅಗತ್ಯ ಸೇವೆಗಳಡಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏಪ್ರಿಲ್ ೧೯, ೨೦ ಹಾಗೂ ೨೧ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ೧೫ ಅಭ್ಯರ್ಥಿಗಳು ಕಣದಲ್ಲಿದ್ದು, ಅವರಿಗೆ ಗುರುತಿನ ಚಿಹ್ನೆಯನ್ನು ನೀಡಲಾಗಿದ್ದು, ಅದರ ಜೊತೆ ಒಂದು ನೋಟ ಮತ ಸಹ ಇರುತ್ತದೆ. ಚುನಾವಣೆಯು ಏಪ್ರಿಲ್ ೨೬ ರಂದು ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಮತದಾರರು ಮತದಾನದಿಂದ ದೂರ ಉಳಿಯದಂತೆ ಕ್ರಮವಹಿಸಿ ಎಂದರು.
ಸಭೆಯಲ್ಲಿ ವೆಚ್ಚ ವೀಕ್ಷಕರಾದ ಡಿ. ಅಮೋಯ್ ಕುಮಾರ್ ಅವರು ಮಾತನಾಡಿ, ಸಿ-ವಿಜಿಲ್ ತಂತ್ರಾಂಶದ ಮೂಲಕ ದೂರುಗಳನ್ನು ದಾಖಲಿಸಬಹುದು. ಸಿ-ವಿಜಿಲ್ನಲ್ಲಿ ದೂರು ದಾಖಲಿಸಿದ ೧೦೦ ನಿಮಿಷಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೂರು ದಾಖಲಿಸಿರುವ ವಿಳಾಸದಲ್ಲಿ ಹಾಜರಿರುತ್ತಾರೆ ಎಂದು ತಿಳಿಸಿದರು. ಸುವಿಧ: ಸುವಿಧ ತಂತ್ರಾಂಶದಲ್ಲಿ ರಾಜಕೀಯ ಪಕ್ಷಗಳು ನಡೆಸುವ ಸಭೆ, ಸಮಾರಂಭ, ವಾಹನಗಳ ಓಡಾಟಗಳ ಅನುಮತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬಹುದಾಗಿದೆ ಎಂದರು.
ಮತಗಟ್ಟೆಗಳ ಹಂಚಿಕೆ: ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತಗಟ್ಟೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರರಾದ ತೇಜಸ್ವಿನಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಹಾಗೂ ಲೋಕಸಭಾ ಅಭ್ಯರ್ಥಿಗಳು ಉಪಸ್ಥಿತರಿದ್ದರು.