ರಾಮನಗರ: ಈ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲಾ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ ಯೋಗೇಶ್ವರ್, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸರ್ಕಾರದ ಬೆಂಬಲದೊಂದಿಗೆ ನಿಮ್ಮ ಸೇವೆ ಮಾಡುತ್ತೇವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಮಳೂರಿನಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಡಿ.ಕೆ. ಸುರೇಶ್ ಅವರು ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು:
ಕುಮಾರಸ್ವಾಮಿ ಅವರು ನಿಮ್ಮ ಆಶೀರ್ವಾದದಿಂದ ಎರಡನೇ ಬಾರಿಗೆ ವಿಧಾನಸೌಧಕ್ಕೆ ಪ್ರವೇಶ ಮಾಡಿದಾಗ ಕುಮಾರಸ್ವಾಮಿ ಅವರು ಏನು ಹೇಳಿದರು? ಶಾಸಕರಾಗಿ ಆಯ್ಕೆಯಾದ ನಂತರ ಐದು ವರ್ಷಗಳ ಕಾಲ ಜನರ ಮಧ್ಯೆ ಇರಬಾರದು, ನಿಮಗಾಗಿ ಕೆಲಸ ಮಾಡಬಾರದು. ಚುನಾವಣೆ ಸಮಯದಲ್ಲಿ ತಂತ್ರಗಾರಿಕೆ ಮಾಡಿ ಕಣ್ಣೀರು ಹಾಕಿ ಮತ ಕೇಳಿದರೆ ಸಾಕು ಎಂದು ಹೇಳಿದ್ದಾರೆ. ಇದು ಈ ತಾಲೂಕಿನ ಜನತೆಗೆ ಮಾಡಿರುವ ಅಪಮಾನ. ಇಂತಹ ಧೋರಣೆ ಹೊಂದಿರುವ ಕುಟುಂಬದ ಬಗ್ಗೆ ಚನ್ನಪಟ್ಟಣದ ಮತದಾರರು ತೀರ್ಮಾನ ಮಾಡಬೇಕು. ಅವರು ಹೇಳಿದಂತೆ ಕಳೆದ 8-10 ದಿನಗಳಿಂದ ಚುನಾವಣಾ ತಂತ್ರಗಾರಿಕೆ ಮಾಡಿಕೊಂಡು ಈಗ ಬಂದಿದ್ದಾರೆ. ಸಿದ್ದರಾಮಯ್ಯ ಅವರು ಹದಿನೈದು ದಿನಕ್ಕೊಮ್ಮೆ ಮೈಸೂರಿಗೆ ಹೋಗುತ್ತಾರೆ. ಡಿ.ಕೆ. ಶಿವಕುಮಾರ್ ಅವರು ಹದಿನೈದು ದಿನಕ್ಕೊಮ್ಮೆ ಕನಕಪುರಕ್ಕೆ ಹೋಗುತ್ತಾರೆ. ಕಾರಣ ಅವರಿಗೆ ತಮ್ಮ ಮತದಾರರ ಋಣ ತೀರಿಸುವ ಬದ್ಧತೆ ಇದೆ. ಕಷ್ಟ ಸುಖ ಕೇಳುವ ಬದ್ಧತೆ ಇದೆ. ಆದರೆ ಕುಮಾರಸ್ವಾಮಿ ಅವರು ಐದು ವರ್ಷಕ್ಕೊಮ್ಮೆ ಹಣ ಹಂಚಿದರೆ ಸಾಕು ಎಂಬ ಧೋರಣೆ ಇದೆ. ಜಾತಿ ಹೆಸರಲ್ಲಿ ಕಣ್ಣೀರು ಹಾಕಿದರೆ ಸಾಕು.
ನೀವು ನಿಮ್ಮ ರಾಜಕೀಯ ಜೀವನದಲ್ಲಿ ಯಾರನ್ನು ಯಾವ ರೀತಿ ಬಳಸಿಕೊಂಡಿದ್ದೀರಿ? ಹೇಗೆ ಮೋಸ ಮಾಡಿದ್ದೀರಿ ಎಂದು ಆಲೋಚಿಸಿ. ಕುಮಾರಸ್ವಾಮಿ ಅವರು ನನ್ನ ಹೇಳಿಕೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರಸ್ತಾಪ ಮಾಡಿದ್ದೀರಿ. ಯೋಗೇಶ್ವರ್ ಹಾಗೂ ನಾನು 30 ವರ್ಷಗಳ ಹಳೇ ಸ್ನೇಹಿತರು. ಆತ ನನ್ನ ಬೈಯ್ಯುತ್ತಾನೆ. ನಾನು ಆತನಿಗೆ ಬೈಯ್ಯುತ್ತೇನೆ. ನೀವು ಯಾರನ್ನು ಬೈದಿದ್ದೀರಿ ಗೊತ್ತಾ ನೀವು ಮತದಾರರನ್ನು ನಿಂದಿಸಿದ್ದೀರಿ. ನಮ್ಮ ವಾಗ್ವಾದ ವೈಯಕ್ತಿಕವಾದುದ್ದು. ನೀವು ಟೀಕೆ ಮಾಡಿರುವುದು ನಿಮಗೆ ಆಶೀರ್ವಾದ ಮಾಡಿರುವ ಜನರಿಗೆ. ಇದಕ್ಕೆ ನೀವು ಉತ್ತರಿಸಿ ಎಂದರು.