ಮಂಗಳೂರು : ಪಟಾಕಿ ಅಂಗಡಿಗಳ ಮಾಲಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ, ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂದಹಾಗೇ ಈ ಘಟನೆ ಅ.22ರಂದು ನಡೆದಿದ್ದು, ಪಟಾಕಿ ಅಂಗಡಿಗಳ ಮಾಲೀಕರು ಹೆದರಿ ಪೊಲೀಸ್ ದೂರು ನೀಡಲು ಹಿಂದೇಟು ಹಾಕಿದ್ದರು.
ಇತ್ತೀಚೆಗೆ ವಿಚಾರ ತಿಳಿದು ಪೊಲೀಸರು ರಕ್ಷಣೆ ನೀಡುವ ಭರವಸೆ ನೀಡಿದ ಬಳಿಕ ಪಟಾಕಿ ಅಂಗಡಿಯೊಂದರ ಮಾಲಕ ದಾಮೋದರ ಎಂಬವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ದೂರು ನೀಡಿದ್ದಾರೆ. ಈ ದೂರನ್ನು ಆಧರಿಸಿ ಪ್ರಕರಣ ದಾಖಲಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ರೌಡಿ ಶೀಟರ್ ಪ್ರಶಾಂತ್ ಇತ್ತೀಚೆಗೆ ಕೊಲೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಆಪ್ತ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



