ಕಲಬುರಗಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಲ್ಲಿರುವ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೀದರ್ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮಂಗಳವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಜೈಲಿನ ಕಂಪೌಂಡ್ ಹಾರಿ ಪರಾರಿಯಾಗಿದ್ದಾರೆ.
ಪರಾರಿಯಾದ ಕೈದಿಗಳನ್ನು ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಮೂಲದ ಮಸ್ತಾನ್, ಔರಾದ್ ತಾಲೂಕಿನ ಸಂತಾಪುರ ಗ್ರಾಮದ ಸಂತೋಷ್ ಹಾಗೂ ಬೀದರ್ ತಾಲೂಕಿನ ಬಕ್ಕಚೌಡಿ ಗ್ರಾಮದ ಸಾಗರ್ ಎಂದು ಗುರುತಿಸಲಾಗಿದೆ.
ಕೈದಿಗಳ ಪರಾರಿಗೆ ಜೈಲು ಸಿಬ್ಬಂದಿಯೇ ಸಹಕಾರ ನೀಡಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಮಧ್ಯರಾತ್ರಿ ಲಾಕಪ್ನಲ್ಲಿ ಇರಬೇಕಾದ ಕೈದಿಗಳು ಹೊರಗೆ ಬಂದಿದ್ದು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಈ ಹಿನ್ನೆಲೆ ಜೈಲಿನ ಕೆಲವು ಸಿಬ್ಬಂದಿ ಹಾಗೂ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಈ ಸಂಬಂಧ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಕೈದಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದೇ ವೇಳೆ ಘಟನೆಗೂ ಮುನ್ನ ಸೋಮವಾರ ಬೆಳಗ್ಗೆ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದರು.



