ಮಂಡ್ಯ: ಕೆಆರ್ಎಸ್ ಅಚ್ಚುಕಟ್ಟು ವಿಭಾಗದ ನೂರಾರು ರೈತರು ಮತ್ತು ವಿವಿಧ ಸಂಘಟನೆಗಳ ವಿರೋಧದ ನಡುವೆ ಮಂಡ್ಯ ಜಿಲ್ಲಾಡಳಿತ ಕೆಆರ್ಎಸ್ ಅಣೆಕಟ್ಟೆ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಜ್ಜಾಗಿದೆ. ೬ ತಿಂಗಳ ಒಳಗೆ ಕೆಆರ್ಎಸ್ ವ್ಯಾಪ್ತಿಯಲ್ಲಿ ಪರೀಕ್ಷಾರ್ಥ ಸ್ಪೋಟ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆ ಜಿಲ್ಲಾಡಳಿತ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿದೆ. ಇಂದಿನಿಂದ ೪ ದಿನಗಳ ಟ್ರಯಲ್ ಬ್ಲಾಸ್ಟ್ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್ಎಸ್ ಅಣೆಕಟ್ಟೆಗೆ ಹಾನಿ ಆಗುತ್ತದೆ ಎಂದು ಹಲವು ಹೋರಾಟಗಳು ನಡೆದವು. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹೈಕೋರ್ಟ್ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿತ್ತು. ಇದೀಗ ಇದೇ ಹೈಕೋರ್ಟ್ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆಆರ್ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುತ್ತಾ ಎಂದು ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡಿಸಲು ಸರ್ಕಾರಕ್ಕೆ ಆದೇಶ ನೀಡಿದೆ.