ನವದೆಹಲಿ: ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ಪಶ್ಚಿಮ ಬಂಗಾಳದಲ್ಲಿ ಬಂಧನಕ್ಕೊಳಗಾಗಿರುವ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿದ ಅಮಿತ್, ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ. ದುರದೃಷ್ಟವಶಾತ್ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಭಯೋತ್ಪಾದಕರಿಗೆ ಪ.ಬಂಗಾಳ ಸುರಕ್ಷಿತ ಸ್ವರ್ಗವಾಗಿದೆ ಎಂದು ದೀದಿ ಸರ್ಕಾರವನ್ನು ಟೀಕಿಸಿದ್ದಾರೆ.
ಅಮಿತ್ ಮಾಳವಿಯ ಟೀಕೆಗೆ ಬಂಗಾಳ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳವು ಎಂದಿಗೂ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿಲ್ಲ. ರಾಜ್ಯ ಪೊಲೀಸರು ತನ್ನ ಜನರನ್ನು ಕೆಟ್ಟ ಚಟುವಟಿಕೆಗಳಿಂದ ಸುರಕ್ಷಿತವಾಗಿರಿಸುವಲ್ಲಿ ಸದಾ ಜಾಗರೂಕತೆಯಿಂದ ಕೆಲಸ ಮಾಡುತ್ತಿದ್ದಾರೆ. ಅಸತ್ಯವು ಅತ್ಯಂತ ಕೆಟ್ಟದಾಗಿದೆ. ಆರೋಪಿಗಳ ಬಂಧನಕ್ಕೆ ಬಂಗಾಳ ಪೊಲೀಸರೂ ಕೆಲಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.