ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಕೆಲಸಗಳನ್ನು ಮಾಡಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕಲಬುರಗಿ ಜಿಲ್ಲೆಯ ಚಿತ್ತಾಪುರ, ನಾಲ್ವಾರ್ ಮತ್ತು ವಾಡಿ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸಲು ಅಡುಗೆ ಸಿಬ್ಬಂದಿಗೆ ಸಹಾಯ ಮಾಡಲು ವಿದ್ಯಾರ್ಥಿಗಳಿಂದ ದೂರದ ಸ್ಥಳಗಳಿಂದ ಕುಡಿಯುವ ನೀರನ್ನು ಹೊತ್ತು ತರಿಸಲಾಗುತ್ತಿದೆ ಎನ್ನಲಾಗಿದೆ.
ಈ ಕುರಿತು ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ಬುಧವಾರ(ಮಾ.11) ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ.
ಇನ್ನೂ ಕೆಲ ಶಾಲೆಗಳಲ್ಲಿ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ತರಕಾರಿ ಕತ್ತರಿಸುವ ಕೆಲಸವನ್ನೂ ಮಾಡಿಸಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದು, ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ವಿದ್ಯಾಭ್ಯಾಸ ಮಾಡಲು ಶಾಲೆಗಳಲ್ಲಿ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ತಕ್ಷಣ ಮಾಡಬೇಕು. ಜೊತೆಗೆ ಕೈಗೊಂಡ ಕ್ರಮಗಳ ಕುರಿತು ಐದು ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳಿಂದ ಇಂತಹ ಕೆಲಸಗಳನ್ನು ಮಾಡಿಸಬಾರದು ಎಂಬ ನಿಯಮಗಳಿದ್ದರೂ ಈ ರೀತಿಯ ಘಟನೆಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದ್ದು, ಶಿಕ್ಷಕರು, ಅಧಿಕಾರಿಗಳ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.



