ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಬೆನ್ನಲ್ಲೇ ಧಾರವಾಡದ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ನ್ಯಾಯಾಲಯದ ಆದೇಶಕ್ಕೆ ತಲೆಬಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಸಿದ್ಧರಾಗಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, “ನನ್ನ ವಿರುದ್ಧ ರಾಜಕೀಯ ಹುನ್ನಾರ ನಡೆದಿದೆ. ನಾನು ಅಸಹಾಯಕ ಸ್ಥಿತಿಯಲ್ಲಿ ಇದ್ದರೂ ನನಗೆ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗುತ್ತದೆ” ಎಂದು ಭರವಸೆ ವ್ಯಕ್ತಪಡಿಸಿದರು.
ನನ್ನ ಕ್ಷೇತ್ರದಲ್ಲಿ ನಾನು ಇಲ್ಲದೇ ಇದ್ದರೂ ನನ್ನ ಪತ್ನಿ, ಪಕ್ಷದ ಮುಖಂಡರು ಜನರ ಸಂಕಷ್ಟಗಳಿಗೆ ಸ್ಪಂದಿಸುವಂತ ಕೆಲಸ ಮಾಡುತ್ತಿದ್ದಾರೆ. ನಾನು ಕ್ಷೇತ್ರದ ಜನರ ಸಂಕಷ್ಟ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿರುವುದಾಗಿ ಹೇಳಿದರು.
ಅಂದಹಾಗೇ ಶಾಸಕ ವಿನಯ್ ಕುಲಕರ್ಣಿಗೆ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನೀಡಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ಜೂನ್.6ರಂದು ರದ್ದುಪಡಿಸಲಾಗಿತ್ತು. ಅಲ್ಲದೇ ಒಂದು ವಾರದಲ್ಲಿ ವಿಚಾರಣಾ ಕೋರ್ಟ್ ಮುಂದೆ ಶರಣಾಗುವಂತೆಯೂ ಆದೇಶ ಮಾಡಿತ್ತು. ಹೀಗಾಗಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಆದೇಶಕ್ಕೆ ತಲೆಬಾಗಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಶರಣಾಗುವುದಾಗಿ ತಿಳಿಸಿದ್ದಾರೆ.